ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋವಿಡ್ ಆರ್ಟಿಪಿಸಿಆರ್ ಲ್ಯಾಬ್ ಪುನರಾರಂಭ, ಟೆಸ್ಟಿಂಗ್ಗೆ ಸಿದ್ಧತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ (Devanahalli) ಪಟ್ಟಣದ ಸರ್ಕಾರಿ ಆಸ್ವತ್ರೆಯಲ್ಲಿರುವ ಆರ್ಟಿಪಿಸಿಆರ್ ಪ್ರಯೋಗಾಲಯವನ್ನು ಸನ್ನದ್ಧಗೊಳಿಸಲಾಗುತ್ತಿದೆ. ಕೊರೊನಾ ವೈರಸ್ (Covid-19) ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಅದರಂತೆ ದೇವನಹಳ್ಳಿಯಲ್ಲಿಯೂ ಸಿದ್ಧತೆ ಆರಂಭಿಸಲಾಗಿದೆ. ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಯಲ್ಲಿ ಕೋವಿಡ್ 2 ನೇ ಅಲೆ ಸಂದರ್ಭದಲ್ಲಿ ತೆರೆದಿದ್ದ ಆರ್ಟಿಪಿಸಿಆರ್ ಲ್ಯಾಬ್ ಅನ್ನು ಮಂಗಳವಾರ ಪುನರಾರಂಭ ಮಾಡಲಾಯಿತು. ಅಧಿಕಾರಿಗಳು ಲ್ಯಾಬ್ನಲ್ಲಿರುವ ಟೆಸ್ಟಿಂಗ್ ಯಂತ್ರಗಳ ಪರಿಶೀಲನೆ ನಡೆಸಿದರು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮಾದರಿ ಸಂಗ್ರಹ ಹಾಗೂ ಪರೀಕ್ಷೆಗೆ ಆರ್ಟಿಪಿಸಿಆರ್ ಲ್ಯಾಬ್ ಪುನರಾರಂಭ ಮಾಡಲಾಗಿದೆ. ಲ್ಯಾಬ್ಗಳಿಗೆ ಬೆಂಗಳೂರು ಗ್ರಾಮಾಂತರ ಡಿಹೆಚ್ಒ ಕೃಷ್ಣಾರೆಡ್ಡಿ ಬೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣ ಸೇರಿದಂತೆ ಬೆಂಗಳೂರು ನಗರದ ಹೊರವಲಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹದ್ದಿನ ಕಣ್ಣಿಟ್ಟಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗದಂತೆ ಎಚ್ಚರಿಕೆ ವಹಿಸಿದೆ. ಈ ಮಧ್ಯೆ, ಜಿಲ್ಲೆಯಲ್ಲಿ ಎರಡು ಸಕ್ರಿಯ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಒಬ್ಬರು ಪೈಲಟ್ ಆಗಿದ್ದಾರೆ. ಕೋವಿಡ್ ಪ್ರಕರಣಗಳ ಬಗ್ಗೆ ಗಮನಹರಿಸಿ, ಮಾದರಿ ಸಂಗ್ರಹ ಮಾಡುವಂತೆ ಜಿಲ್ಲಾ ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದು, ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ ಓಡಾಡುವಂತೆ ಸಲಹೆ ನೀಡಿದ್ದಾರೆ.



