ಇತ್ತೀಚಿನ ಸುದ್ದಿ
Trending

ಶಾಂತಿಮಂತ್ರದ ಟ್ವೀಟ್ ಹಾಕಿ ಡಿಲೀಟ್ ಮಾಡಿದ ಕಾಂಗ್ರೆಸ್; ಇದು ಸರಿಯಲ್ಲ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ತಡ ರಾತ್ರಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುವ ಮೂಲಕ ಭಾರತೀಯ ಸೇನೆ ತಕ್ಕ ಪಾಠ ಕಲ್ಪಿಸಿದೆ. ಈ ನಡುವೆ ಕರ್ನಾಟಕ ಕಾಂಗ್ರೆಸ್ ಅಧಿಕೃತ ಎಕ್ಸ್ ಖಾತೆಯಲ್ಲಿ ಶಾಂತಿಯ ಮಂತ್ರ ಪಠಿಸುವ ಟ್ವೀಟ್ ಹಾಕಿತ್ತು. ಆದರೆ ಇದು ಚರ್ಚೆಗೊಳಲಾಗುತ್ತಲೇ ಡಿಲೀಟ್ ಮಾಡಲಾಯಿತು.ಆಪರೇಷನ್ ಸಿಂಧೂರ್ ಕುರಿತಾಗಿ ದೇಶದಲ್ಲಿ ಚರ್ಚೆಗಳು ಹಾಗೂ ಸೇನೆಗೆ ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ಶಾಂತಿಯ ಮಂತ್ರವನ್ನು ಸಾರುವ ಅರ್ಥದಲ್ಲಿ ಕಾಂಗ್ರೆಸ್ ಟ್ಚೀಟ್ ಒಂದನ್ನು ಮಾಡಿತ್ತು. ‘ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಶಾಂತಿ’ ಎಂದು ಟ್ವೀಟ್ ಮಾಡಿತ್ತು. ಆದರೆ ಪಕ್ಷದ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು. ಕೂಡಲೇ ಇದನ್ನು ಡಿಲೀಟ್ ಮಾಡಲಾಗಿದೆ.

ಇನ್ನು ಇದೇ ವಿಚಾರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಭಾರತೀಯ ಸೇನೆ ಆಪರೇಷನ್ ಸಿಂಧೂರ್ ದಾಳಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ಪಹಲ್ಗಾಮ್ ದಾಳಿಯ ನಂತರದಲ್ಲಿ ಸರಕಾರದ ಯಾವುದೇ ನಿಲುವಿಗೆ ನಮ್ಮ ಬೆಂಬಲ ಇದೆ ಎಂದಿದ್ದೆವು. ಭಾರತೀಯ ಸೇನೆ ಭಯೋತ್ಪಾದಕರ ನೆಲೆಯನ್ನು ಅಷ್ಟೇ ಟಾರ್ಗೆಟ್ ಮಾಡಿದೆ. ಪಾಕಿಸ್ತಾನ ಈ ದಾಳಿಗೆ ತಿರುಗೇಟು ಕೊಟ್ಟರೆ ನಾವು ಎದುರಿಸಲು ಸಿದ್ದ ಎಂದು ಭಾರತೀಯ ಸೇನೆ ಕೊಟ್ಟಿದೆ. ರಾಷ್ಟ್ರದ ಐಕ್ಯತೆ ಬಂದಾಗ ಯಾವುದೇ ರಾಜಕೀಯ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಭಾರತೀಯ ಸೇನೆಯ ಜೊತೆಗೆ ಇದ್ದೇವೆ ಎಂದರು.ನಾವು ಶಾಂತಿಯುತ ರಾಷ್ಟ್ರ. ಅಗತ್ಯ ಬಿದ್ದಾಗ ಯುದ್ಧ ಮಾಡಿದ್ದೆವು. ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದು ಸರಿಯಲ್ಲ. ಎರಡು ಸಾರಿ ನಾವು ಪಾಕಿಸ್ತಾನದ ವಿರುದ್ಧ ಯುದ್ದ ಮಾಡಿದ್ದೆವು. ಚೀನಾದ ವಿರುದ್ಧ ಯುದ್ಧ ನಡೆದಾಗ ಬಿಜೆಪಿ ಹುಟ್ಟಿತ್ತಾ? ಇಷ್ಟು ದೊಡ್ಡ ಸೇನೆಯನ್ನು ಬೆಳೆಸಿದ್ದು ಉಗ್ರರ ವಿರುದ್ದ. ಬಿಜೆಪಿ ಕೂಡಾ ರಾಜಕೀಯ ಮಾಡಬಾರದು ಎಂದು ಹೇಳಿದರು.ರಾಜ್ಯದ ಕಾಂಗ್ರೆಸ್ ನಾಯಕರು ತಮ್ಮ ಟ್ವೀಟ್ ಸಂಬಂಧ ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ಸಿನವರು ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಶಾಂತಿ ಎಂದು ಇವತ್ತು ಟ್ವೀಟ್ ಮಾಡಿದ್ದಾರೆ. ಇವರಿಗೆ ನಾಚಿಕೆ ಆಗಬೇಕಾಗಿತ್ತು ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿಯವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಇಂಥ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಇಂಥ ಹೇಳಿಕೆ ನೀಡಿದ್ದು, ಶೋಭೆ ತರತಕ್ಕಂಥದ್ದಲ್ಲ ಎಂದು ಆಕ್ಷೇಪಿಸಿದ್ದಾರೆ.ರಾಜ್ಯ ಕಾಂಗ್ರೆಸ್ ನಾಯಕರು ಯಾವ ರೀತಿ ಟ್ವೀಟ್ ಮಾಡಿದ್ದಾರೋ ಇದಕ್ಕೆ ಸ್ಪಷ್ಟನೆ ನೀಡಬೇಕು. ಕಾಂಗ್ರೆಸ್ಸಿನವರು ಉಗ್ರರ ಪರವಾಗಿ ಇದ್ದಾರಾ? ಭಾರತದ ಪರವಾಗಿ ಇದ್ದಾರಾ? ಅಥವಾ ಪಾಕಿಸ್ತಾನದ ಪರವಾಗಿದ್ದಾರೋ ಎಂಬುದನ್ನು ಸ್ಪಷ್ಟಪಡಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.


Related Articles

Leave a Reply

Your email address will not be published. Required fields are marked *

Back to top button